ಕೋಲಾರ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯುವಕನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 30 ವರ್ಷಗಳ ಕಠಿಣ ಸಜೆ ಹಾಗೂ 22 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
2019ರ ಅ.10ರಂದು ಕೆಜಿಎಫ್ನ ಮಂಜುನಾಥ ನಗರದಲ್ಲಿರುವ ತನ್ನ ಮನೆಯಲ್ಲಿ ಒಬ್ಬಳೇ ಇದ್ದ ಅಪ್ರಾಪ್ತೆ ಮೇಲೆ 26 ವರ್ಷದ ಯುವಕ ಕುಟ್ಟಿ ಅಲಿಯಾಸ್ ತಮಿಳರಸನ್ ಅತ್ಯಾಚಾರವೆಸಗಿದ್ದ. ಈ ಸಂಬಂಧ ಕೆಜಿಎಫ್ನ ರಾರ್ಬಟ್ಸನ್ಪೇಟೆಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಠಾಣೆಯ ಅಂದಿನ ಇನ್ಸ್ಪೆಕ್ಟರ್ ಎಂ.ಸೂರ್ಯಪ್ರಕಾಶ್ ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ಸಾಬೀತಾಗಿದೆ ಎಂದು ಘೋಷಿಸಿದೆ ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ.ಪಿ.ದೇವಮಾನೆಯವರು ಅಪರಾಧಿ ಕುಟ್ಟಿ ಅಲಿಯಾಸ್ ತಮಿಳರಸನ್ ಗೆ 30 ವರ್ಷಗಳ ಕಠಿಣ ಸಜೆ ಹಾಗೂ 22 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರದ ವಿಶೇಷ ಅಭಿಯೋಜಕ ಎಸ್. ಮುನಿಸ್ವಾಮಿಗೌಡ ವಾದ ಮಂಡಿಸಿದ್ದರು.