Karnataka HC directs MCC- ಪಚ್ಚನಾಡಿ ತ್ಯಾಜ್ಯ ನಿರ್ವಹಣಾ ಕೇಂದ್ರ: ಮಂಗಳೂರು ಪಾಲಿಕೆಗೆ ಚಾಟಿ ಬೀಸಿದ ಹೈಕೋರ್ಟ್
ಪಚ್ಚನಾಡಿ ತ್ಯಾಜ್ಯ ನಿರ್ವಹಣಾ ಕೇಂದ್ರ: ಮಂಗಳೂರು ಪಾಲಿಕೆಗೆ ಚಾಟಿ ಬೀಸಿದ ಹೈಕೋರ್ಟ್
ಮಂಗಳೂರಿನ ಪಚ್ಚನಾಡಿಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯದ ಸ್ಥಳಾಂತರ ಮತ್ತು ನಿರ್ವಹಣೆ ಸಂಬಂಧ ಮುಂದಿನ ವಿಚಾರಣೆಯ ಒಳಗೆ ಗುತ್ತಿಗೆ ಒಪ್ಪಂದಕ್ಕೆ ಸಹಿ ಹಾಕದೇ ಯಾ ಕೆಲಸ ಆರಂಭಿಸದೇ ಇದ್ದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ನ್ಯಾಯಪೀಠದ ಮುಂದೆ ಖುದ್ದು ಹಾಜರಾಗಬೇಕು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಆದೇಶಿಸಿದೆ.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟಿನ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
'ಮುಂದಿನ ವಿಚಾರಣೆ ಒಳಗೆ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಕಲುಷಿತ ನೀರಿನ ಮಾದರಿ ಸಂಗ್ರಹಿಸಿ ಅದನ್ನು ಪರೀಕ್ಷೆ ಮತ್ತು ವಿಶ್ಲೇಷಣೆ ನಡೆಸಿ ವರದಿ ಸಲ್ಲಿಸಬೇಕು. ಸುದೀರ್ಘ ಕಾಲದಿಂದ ಸಂಗ್ರಹವಾಗಿರುವ ತ್ಯಾಜ್ಯದ ಸ್ಥಳಾಂತರ ಮತ್ತು ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಮೊತ್ತವು ರೂ. 50 ಕೋಟಿ ದಾಟುವುದರಿಂದ ಹಣಕಾಸು ಇಲಾಖೆಯ ಅನುಮೋದನೆಗೆ ಕಳುಹಿಸಿಕೊಡಲಾಗಿದೆ. ಇದಕ್ಕೆ ಅನುಮೋದನೆ ನೀಡುವುದನ್ನು ರಾಜ್ಯ ಸರ್ಕಾರವು ಪರಿಗಣಿಸಬೇಕು. ವಿಳಂಬ ನೀತಿ ಅನುಸರಿಸದೇ ಟೆಂಡರ್ ಪ್ರಕ್ರಿಯೆಯನ್ನು ಅಂತಿಮಗೊಳಿಸಬೇಕು. ಮುಂದಿನ ವಿಚಾರಣೆ ವೇಳೆಗೆ ಕೆಲಸ ಆರಂಭವಾಗಬೇಕು. ಇಲ್ಲವಾದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ನ್ಯಾಯಪೀಠದ ಮುಂದೆ ಖುದ್ದು ಹಾಜರಾಗಬೇಕು' ಎಂದು ಪೀಠ ಸೂಚಿಸಿದೆ.
ಈ ಹಿಂದೆ, ಕಲುಷಿತ ನೀರಿನ ಮಾದರಿ ಸಂಗ್ರಹಿಸಿ ಅದರ ಪರೀಕ್ಷೆ ಮತ್ತು ವಿಶ್ಲೇಷಣೆ ನಡೆಸಿ ವರದಿ ಸಲ್ಲಿಸಲು ಸಿಪಿಸಿಬಿಗೆ ನಿರ್ದೇಶಿಸಲಾಗಿತ್ತು. ಸುದೀರ್ಘ ಕಾಲದಿಂದ ಸಂಗ್ರಹವಾಗಿರುವ ತ್ಯಾಜ್ಯ ಸ್ಥಳಾಂತರ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರನ್ನು ಪತ್ತೆ ಹಚ್ಚಿ ಟೆಂಡರ್ ಅಂತಿಮಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶಿಸಲಾಗಿತ್ತು.
'ತ್ಯಾಜ್ಯ ನಿರ್ವಹಣೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿ ಆರಂಭಿಸಬೇಕು' ಎಂದು ಕೆಎಸ್ಎಲ್ಎಸ್ಎ ಪರ ವಕೀಲ ಶ್ರೀಧರ್ ಪ್ರಭು ಹೇಳಿದರು.
'ಕಲುಷಿತ ನೀರನ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆ ಮತ್ತು ವಿಶ್ಲೇಷಣೆಗೆ ನಾಲ್ಕು ವಾರಗಳ ಕಾಲಾವಕಾಶ ಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ ಮಾಡಿತು. ಇದಕ್ಕೆ ಅಸಮಾಧಾನಗೊಂಡ ನ್ಯಾಯಪೀಠ, ಕಳೆದ ನವೆಂಬರ್ನಲ್ಲಿ ಪರೀಕ್ಷೆಗೆ ನಿರ್ದೇಶನ ನೀಡಲಾಗಿತ್ತು ಎಂದು ನೆನಪಿಸಿತು.