ಮಂಗಳೂರು: ಆ.13 - 15ರವರೆಗೆ ಎಲ್ಲರ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಾಟವಾಗಲಿ: ಜಿಲ್ಲಾಧಿಕಾರಿ

ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 - 15 ರವರೆಗೆ ಹಮ್ಮಿಕೊಂಡಿರುವ 'ಹರ್ ಘರ್ ತಿರಂಗಾ' ಕಾರ್ಯಕ್ರಮದಡಿ ದ.ಕ.ಜಿಲ್ಲೆಯ ಎಲ್ಲಾ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಟವಾಗಲಿ. ಈ ಮೂಲಕ ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪೂರಕವಾದ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಂಬಂಧಿಸಿದವರಿಗೆ ನಿರ್ದೇಶನ ನೀಡಿದರು. 

ಜಿಲ್ಲಾಧಿಕಾರಿಯವರ ಕಚೇರಿಯ ಕೆಸ್ವಾನ್ ವೀಡಿಯೋ ಸಂವಾದದ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 13 ರಿಂದ 15ರ ವರೆಗೆ ಜಿಲ್ಲೆಯಲ್ಲಿರುವ ಎಲ್ಲಾ ಮನೆಗಳ ಮೇಲೂ ರಾಷ್ಟ್ರಧ್ವಜ ಹಾರಿಸಲು ಅನುಕೂಲವಾಗುವಂತೆ ಧ್ವಜಗಳನ್ನು ಸರಬರಾಜು ಮಾಡಬೇಕಿದೆ. ಈ ದಿಸೆಯಲ್ಲಿ ಅಗತ್ಯ ಕ್ರಮವಹಿಸಲಾಗಿದೆ. ಮುಖ್ಯವಾಗಿ ಎನ್.ಆರ್.ಎಲ್.ಎಂ. ಮೂಲಕ ಸ್ವಸಹಾಯ ಸಂಘಗಳ ಸದಸ್ಯರಿಗೆ ಧ್ವಜ ಸಿದ್ಧಪಡಿಸಿ ನೀಡುವ ಆದೇಶ ನೀಡಲಾಗಿದೆ. ಅದರಂತೆ ಅವರು ಧ್ವಜ ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕವೂ ಧ್ವಜಗಳ ಸರಬರಾಜಾಗುತ್ತಿದ್ದು, ಅವುಗಳನ್ನು ವಿತರಿಸಲು ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಸಭೆ ನಡೆಸುವಂತೆ ತಿಳಿಸಿದರು. 

ಈ ಮೂರು ದಿನಗಳಲ್ಲಿ ಸರ್ಕಾರದ ಎಲ್ಲಾ ಕಚೇರಿಗಳು, ಸರ್ಕಾರೇತರ ಕಚೇರಿಗಳು, ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜ ಹಾರಾಡಬೇಕು. ಅದೇ ರೀತಿ ರೈಲು ನಿಲ್ದಾಣಗಳು, ವಿಮಾನ ನಿಲ್ದಾಣ, ವಿದ್ಯಾರ್ಥಿ ನಿಲಯಗಳು, ವಾಣಿಜ್ಯ ಸಂಕಿರ್ಣಗಳು ಸೇರಿದಂತೆ ಎಲ್ಲೆಡೆ ಧ್ವಜ ಆರೋಹಣವಾಗಬೇಕು.  ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ಇದು ತಿಳಿಯಬೇಕು, ಪ್ರಭಾತ್ ಪೇರಿಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. 

      
BREAKING NEWS
Loading latest news...
Join our WhatsApp Channel Powered By : Online Pudu