ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಕೆ; ಮನಪಾ ನೈರ್ಮಲ್ಯ ನಿರೀಕ್ಷಕನಿಗೆ 4ವರ್ಷ ಸಾದಾ ಸಜೆ, 1 ಕೋಟಿ ರೂ. ದಂಡ

ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮನಪಾ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿಗೆ 4ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಆರೋಪಿ ಶಿವಲಿಂಗ ಕೊಂಡಗುಳಿ ತನ್ನ ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ 2013ರ ಫೆಬ್ರವರಿ 15ರಂದು ದಾಳಿ ನಡೆಸಿ ಆತನನ್ನು ಬಂಧಿಸಿದೆ. ಈ ಬಗ್ಗೆ ಲಂಚ ವಿರೋಧಿ ಕಾಯ್ದೆ 1988ರನ್ವಯ ಪ್ರಕರಣ ದಾಖಲಾಗಿತ್ತು. ಅಂದಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಉಮೇಶ್ ಜಿ. ಶೇಟ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಆರೋಪಿ ಶಿವಲಿಂಗ ಕೊಂಡಗುಳಿ ಮೇಲೆ ಅಕ್ರಮ‌ ಆಸ್ತಿ ಗಳಿಕೆ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ.ಬಿ.ಜಕಾತಿಯವರು ಆರೋಪಿಗೆ 4ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿದ್ದಾರೆ. ಆರೋಪಿ ದಂಡ ತೆರಲು ವಿಫಲನಾದಲ್ಲಿ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ. 

ಸರಕಾರದ ಪರವಾಗಿ ಕರ್ನಾಟಕ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ವಾದಿಸಿದ್ದಾರೆ‌.
BREAKING NEWS
Loading latest news...
Join our WhatsApp Channel Powered By : Online Pudu