-->

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ಸಹಿತ ಮೂವರಿಗೆ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ಸಹಿತ ಮೂವರಿಗೆ ಕಠಿಣ ಶಿಕ್ಷೆ


ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಬಾಲಕಿಯ ತಾಯಿ ಸೇರಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ.

ಕೋಟೆಕಾರಿನ ಡೆರ್ವಿನ್ ಡಿಸೋಜಾ, ಸಂತ್ರಸ್ತೆಯ ತಾಯಿ ಮತ್ತು ಕಲ್ಲಾಪುವಿನ ಮೆಲ್ವಿನ್ ಡಿಸೋಜಾ ಶಿಕ್ಷೆಗೊಳಗಾದ‌ ಅಪರಾಧಿಗಳು. ಪೈಂಟರ್ ವೃತ್ತಿ ನಿರ್ವಹಿಸುತ್ತಿದ್ದ ಡೆರ್ವಿನ್ ಡಿಸೋಜಾ ಮಹಿಳೆಯೊಬ್ಬಳ ಸ್ನೇಹ ಬೆಳೆಸಿಕೊಂಡು ಆಕೆಯ ಮನೆಗೆ ಹೋಗುತ್ತಿದ್ದ. ಜೊತೆಗೆ ಆಕೆಗೆ ಆರ್ಥಿಕ ಸಹಾಯವನ್ನು ಮಾಡುತ್ತಿದ್ದ. ಆದರೆ ಈತ ಮನೆಗೆ ಹೋಗುತ್ತಿದ್ದಂತೆ ಮಹಿಳೆಯ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ. ಇದು ಸ್ಥಳೀಯರಿಗೆ ತಿಳಿದ ಬಳಿಕ ಆಕ್ಷೇಪ ಕೇಳಿ ಬಂದಿತ್ತು. ಆ ಬಳಿಕ ಆತ ಆ ಬಾಲಕಿಯನ್ನು ತನ್ನ ಸ್ನೇಹಿತ ಮೆಲ್ವಿನ್‌ ಮನೆಗೆ ಕರೆದೊಯ್ದಿದ್ದ. ಅಲ್ಲಿ ಆ ಬಾಲಕಿಯನ್ನು ಅಕ್ರಮವಾಗಿ ಕೂಡಿ ಹಾಕಿ ಮನೆಯಿಂದ ಹೊರಗೆ ಹೋಗದಂತೆ ನೋಡಿಕೊಂಡಿದ್ದ. ಅಷ್ಟಲ್ಲದೆ ಲೈಂಗಿಕ ದೌರ್ಜನ್ಯವೆಸಗಿದ್ದ.

ಈ ವಿಚಾರ ತಿಳಿದ ಸಾರ್ವಜನಿಕರು 2016ರ ಡಿಸೆಂಬರ್‌ನಲ್ಲಿ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ರಕ್ಷಣಾ ಘಟಕದವರು ಬಾಲಕಿಯನ್ನು ರಕ್ಷಿಸಿ ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್‌ಗಳಾದ ಸವಿತ್ರತೇಜ ಮತ್ತು ಕೆ.ಆರ್.ಗೋಪಿಕೃಷ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-2 (ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ವಿಚಾರಣೆ ನಡೆಸಿ ಆರೋಪಿಗಳನ್ನು ತಪ್ಪಿತಸ್ಥರೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ನ್ಯಾಯಾಧೀಶರು ಅಪರಾಧಿ ಡೆರ್ವಿನ್ ಡಿಸೋಜಗೆ ಪೊಕ್ಸೊ ಕಲಂ 6ರಡಿ 15 ವರ್ಷ ಕಠಿನ ಸಜೆ, 50,000 ರೂ. ದಂಡ ವಿಧಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಹೆಚ್ಚುವರಿ ಸಜೆ, ಐಪಿಸಿ ಕಲಂ 366ರಂತೆ 7 ವರ್ಷ ಕಠಿನ ಸಜೆ, 25,000 ರೂ. ದಂಡ ವಿಧಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ 6 ತಿಂಗಳ ಸಜೆ, ಐಪಿಸಿ  ಕಲಂ 343ರಂತೆ 2 ವರ್ಷ ಕಠಿನ ಸಜೆ ವಿಧಿಸಿದ್ದಾರೆ. 

ಅಲ್ಲದೆ ಕೃತ್ಯಕ್ಕೆ ಸಹಕರಿಸಿದ ಮಹಿಳೆಗೆ ಪೊಕ್ಸೊ ಕಲಂ 17ರಡಿ 14 ವರ್ಷ ಕಠಿನ ಸಜೆ, 25,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಸಜೆ ವಿಧಿಸಿದ್ದಾಾರೆ. ಮತ್ತೊಬ್ಬ ಅಪರಾಧಿ ಮೆಲ್ವಿನ್‌ಗೆ ಪೊಕ್ಸೊ ಕಲಂ 21ರಡಿ 6 ತಿಂಗಳ ಸಜೆ, 30,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡಬೇಕು. ಅದರಲ್ಲಿ 1 ಲಕ್ಷ ರೂ. ಹಣವನ್ನು ತಕ್ಷಣ ನೀಡಬೇಕು. ಉಳಿದ 4 ಲಕ್ಷ ರೂ. ಹಣನ್ನು ಆಕೆಯ ಹೆಸರಿನ ರಾಷ್ಟ್ರೀಕೃತ ಬ್ಯಾಂಕ್ ಖಾತೆಗೆ ಜಮೆ ಮಾಡಿ ವಿದ್ಯಾಭ್ಯಾಸ ಮುಂದುವರಿಸಲು ಸಂದರ್ಭಾನುಸಾರ ತೆಗೆಯಲು ಅವಕಾಶ ನೀಡಬೇಕು ಎಂದು ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದರು.

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.

Ads on article

Advertise in articles 1

advertising articles 2

Advertise under the article