ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಸಹೋದರನ ಕಾರಿಗೆ ದ್ವಿಚಕ್ರ ಢಿಕ್ಕಿ ; ದೂರು - ಪ್ರತಿದೂರು ದಾಖಲು


ಮಂಗಳೂರು: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ದ.ಕ.ಜಿಲ್ಲೆಯ ಸರಣಿ ಕೊಲೆ ಪ್ರಕರಣದಲ್ಲಿ ಹತ್ಯೆಗೊಳಗಾದ ಸುರತ್ಕಲ್ ಫಾಝಿಲ್‌ ಸಹೋದರ ಆದಿಲ್ ಕಾರಿಗೆ ದ್ವಿಚಕ್ರ ವಾಹ‌ನವೊಂದು ಢಿಕ್ಕಿಯಾಗಿ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತ್ಂಡಗಳಿಂದ ಸುರತ್ಕಲ್ ಠಾಣೆಯಲ್ಲಿ ದೂರು - ಪ್ರತಿದೂರು ದಾಖಲಾಗಿದೆ.

ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶಪುರ ಎಂಬಲ್ಲಿ ಬೈಕ್ ಹಾಗೂ ಕಾರಿನ ನಡುವೆ ಲಘು ಅಪಘಾತ ಸಂಭವಿಸಿತ್ತು. ಈ ವೇಳೆ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಣಾಮ ಸ್ಥಳದಲ್ಲಿ ಜನರು ಜಮಾಯಿಸಿ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.

ಈ ಬಗ್ಗೆ ಮಾಹಿತಿ ಪಡೆದ ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಢಾಯಿಸಿ ಪರಿಸ್ಥಿತಿಯನ್ನು ತಹಬದಿಗೆ ತರಲು ಯತ್ನಿಸಿದ್ದಾರೆ. ಅಲ್ಲದೆ ಕೆಲ ಸಾರ್ವಜನಿಕರೂ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಯಾಗುವಂತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ಬೈಕ್ ಚಾಲಕ ನಾಗೇಶ್ ಎಂಬವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನಲ್ಲಿ 'ಬುಧವಾರ ರಾತ್ರಿ ಆದಿಲ್ ನಿರ್ಲಕ್ಷ್ಯತನದಿಂದ ಕಾರು ಚಲಾಯಿಸಿಕೊಂಡು ಬಂದು ಗಣೇಶಪುರದಲ್ಲಿ ತನ್ನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಆ ಬಳಿಕ ವಾಗ್ವಾದ ನಡೆಸಿ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಅಲ್ಲದೆ ಆದಿಲ್ ನೊಂದಿಗೆ ಆತನ ತಂದೆ ಉಮರ್ ಫಾರೂಕ್ ಹಾಗೂ ಅವರ ಸಂಬಂಧಿಕರೀರ್ವರೂ ತನಗೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಒಟ್ಟು ನಾಲ್ವರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತ ಆದಿಲ್ ರಿಂದಲೂ ಸುರತ್ಕಲ್ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ವಾಹನ ಡಿಕ್ಕಿಯ ಬಳಿಕ ವಾಗ್ವಾದ ಬೆಳೆದು ತನಗೂ ಹಲ್ಲೆ, ಕೊಲೆ ಬೆದರಿಕೆಯನ್ನೊಡ್ಡಲಾಗಿದೆ ಎಂದು ನಾಲ್ವರ ವಿರುದ್ಧ ದೂರು ದಾಖಲಾಗಿದೆ. ಸುರತ್ಕಲ್ ಠಾಣಾ ಪೊಲೀಸರು ಇತ್ತಂಡಗಳ ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu