ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಲುಕ್ ಔಟ್ ನೋಟಿಸ್ ಜಾರಿಯಾಗಿದ್ದ ಆರೋಪಿ ಅಂದರ್



ಮಂಗಳೂರು: ಪ್ರಕರಣವೊಂದರಲ್ಲಿ ಭಾಗಿಯಾಗಿ ಜಾಮೀನು ಪಡೆದು ಆ ಬಳಿಕದಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ ಆರೋಪಿ.

ತೌಸೀಫ್ 2016ರಲ್ಲಿ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅರೆಸ್ಟ್ ಆಗಿದ್ದ. ಆ ಬಳಿಕ ಜಾಮೀನು ಪಡೆದು ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ, ಪೊಲೀಸರ ಕೈಗೂ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ. ಆದ್ದರಿಂದ ಮಂಗಳೂರು ಗ್ರಾಮಾಂತರ ಪೊಲೀಸರು ಈತನ ವಿರುದ್ಧ ಲುಕ್ ಔಟ್ ನೋಟೀಸು ಹೊರಡಿಸಿತ್ತು.

ಅಕ್ಟೋಬರ್ 14ರಂದು ಈತನು ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ಮುಂಬೈಯ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ಮುಂಬೈನ ಇಮಿಗ್ರೇಷನ್ ಅಧಿಕಾರಿಗಳು ಈತನ ವಿರುದ್ಧ ಲುಕ್ ಔಟ್ ನೋಟೀಸ್ ಜಾರಿಯಾಗಿರುವ ಬಗ್ಗೆ ಖಚಿತಪಡಿಸಿ ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಮುಂಬೈ ವಿಮಾನ ನಿಲ್ದಾಣಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿ ತೌಸೀಫ್ ಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಈತನು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಬಂಧಿಯಾಗಿದ್ದಾನೆ.
BREAKING NEWS
Loading latest news...
Join our WhatsApp Channel Powered By : Online Pudu