ಬಂಟ್ವಾಳ: ಶಾರದಾ ವಿಸರ್ಜನೆ ವೇಳೆ ಇತ್ತಂಡಗಳ ನಡುವಿನ ಗಲಾಟೆ - ಚೂರಿ ಇರಿತವಾಗಿ ಮೂವರಿಗೆ ಗಾಯ

ಬಂಟ್ವಾಳ: ನಗರದ ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಎರಡು ಮೂರು ದಿನಗಳ ಹಿಂದೆ ಶಾರದೋತ್ಸವದ ನಡೆದ ಗಲಾಟೆ ಮುಂದುವರಿದು ನಿನ್ನೆ ರಾತ್ರಿ ಚೂರಿ ಇರಿತವಾಗಿ ಮೂವರು ಗಾಯಗೊಂಡ ಘಟನೆ ನಡೆದಿದೆ. 

ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಚೂರಿ ಇರಿತಕ್ಕೊಳಗಾದವರು.


ಗುರುವಾರ ರಾತ್ರಿ 9ಗಂಟೆಗೆ ಮತ್ತೆ ತಂಡಗಳ ನಡುವೆ ವೈಯಕ್ತಿಕ ಕಲಹ ಮುಂದುವರಿದಿದೆ‌. ಈ ವೇಳೆ ಒಂದು ತಂಡದ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದೆ. ಈ ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೆ ಚೂರಿಯಿಂದ ಇರಿದಿದ್ದಾರೆ ಎಂದು ನಗರ ಪೋಲೀಸ್ ಠಾಣೆಗೆ ನೀಡಿದ ದೂರು ದಾಖಲಾಗಿದೆ.


ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಕೆಲವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕುತ್ತಿದ್ದ ಈ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದೆ‌‌. ಆ ಬಳಿಕದಿಂದ ಎರಡು ಪ್ರತ್ಯೇಕ ತಂಡಗಳಾಗಿ ಹುಲಿ ವೇಷವನ್ನು ಹಾಕುತ್ತ ಬರುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ನಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾಗಿದೆ.

ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu