ಮಂಗಳೂರು: ನಗರದ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರಿನ ಹಳೆಯಂಗಡಿ ಚೇಳ್ಯಾರು ನಿವಾಸಿ ದೀಪಕ್(33) ಹಾಗೂ ಕಾವೂರು ಮರಕಡ ನಿವಾಸಿ ಸಂದೀಪ್ ಶೆಟ್ಟಿ(38), ಕಾವೂರು ಗಾಂಧಿನಗರ ನಿವಾಸಿ ಸಂದೀಪ್ ಪೈ (44) ಬಂಧಿತ ಆರೋಪಿಗಳು.
ಚೇಳ್ಯಾರು ಹಾಗೂ ಫಳ್ನೀರು ಎಂಬಲ್ಲಿ ಆರೋಪಿಗಳು ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಆ್ಯಪ್ ಅನ್ನು ಬಳಸಿಕೊಂಡು ಈ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಇವರು ಇದೀಗ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು - ಗೆಲುವಿನ ಅದೃಷ್ಟದ ಜೂಜಾಟವಾಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆಗಳಲ್ಲಿ ದಾಳಿ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು 31,000 ರೂ. ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 1,11,000 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.