ಲೈಂಗಿಕ ದೌರ್ಜನ್ಯದಿಂದ ಬೇಸತ್ತು 16ರ ಬಾಲಕಿ ಆತ್ಮಹತ್ಯೆ: ಕಾಮುಕ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತೆ ಆತ್ಮಹತ್ಯೆ ಎಸಗುವಂತೆ ಮಾಡಿರುವ ಯುವಕನಿಗೆ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರಾಕ್ ವಿಶೇಷ ಕೋರ್ಟ್ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

23 ವರ್ಷದ ಯುವಕ ಜೈಲು ಶಿಕ್ಷೆಗೆ ಗುರಿಯಾದವನು. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. ಈ ಘಟನೆ 2020ರಲ್ಲಿ ನಡೆದಿತ್ತು. ತೀರ್ಥಹಳ್ಳಿ ತಾಲೂಕಿನ ಯುವಕನ ಲೈಂಗಿಕ ದೌರ್ಜನ್ಯದಿಂದ ಬೇಸತ್ತ 16 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಮೃತ ಬಾಲಕಿಯ ತಂದೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಕುರಿತಂತೆ ಹೊಸನಗರ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಬಿ.ಸಿ.ಗಿರೀಶ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ಯುವಕನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ದಾಖಲಿಸಿದ್ದರು.

ನ್ಯಾಯಾಧೀಶೆ ಲತಾ ಅವರು ನ4ರಂದು ಈ ತೀರ್ಪು ನೀಡಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಹರಿಪ್ರಸಾದ್ ಹಾಗೂ ಮಮತಾ ಅವರು ವಾದ ಮಂಡಿಸಿದ್ದರು.
BREAKING NEWS
Loading latest news...
Join our WhatsApp Channel Powered By : Online Pudu