ಮಂಗಳೂರು: ಕೋಟ್ಯಂತರ ಮೌಲ್ಯದ ಬರ್ ಗ್ರೀಸ್ ಮಾರುತ್ತಿದ್ದ ಮೂವರು ಸಿಸಿಬಿ ಬಲೆಗೆ


ಮಂಗಳೂರು: ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ 1.57 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ (ಅಂಬರ್ ಗ್ರೀಸ್)ಯನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಕೋಟ್ಯಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಚಿಕ್ಕಮಗಳೂರು ಮೂಲದ ಸದ್ಯ ಬಂಟ್ವಾಳ ತಾಲೂಕಿನ ವಿಟ್ಲ ಮಂಗಿಲಪದವು ನಿವಾಸಿಗಳಾದ ಪ್ಯಾರೇಜಾನ್ (37), ಬದ್ರುದ್ದೀನ್ (28), ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ ಸನ್ನಿಧಿ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್.(22) ಬಂಧಿತ ಆರೋಪಿಗಳು.

ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಬಳಿ ಮೂವರು ಸ್ವಿಫ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1.575 ಕೆಜಿ ತೂಕದ 1,57,50,000 ರೂ. ಮೌಲ್ಯದ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಹಾಗೂ ಕಾರು, ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. 


ಆರೋಪಿಗಳಿಂದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್)-( 1,57,50,000/-), ತಲಾ 10 ಸಾವಿರ ಮೌಲ್ಯದ ಮೂರು ಮೊಬೈಲ್ ಫೋನ್‌ಗಳು, ಒಂದು ಸಿಲ್ವರ್ ಬಣ್ಣದ ಸ್ವಿಫ್ಟ್ ಕಾರು (5,00,000/-) ಅನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,62,80,000 ರೂ. ಎಂದು ಅಂದಾಜಿಸಲಾಗಿದೆ.


ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಶ್ರೀ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಶ್ರೀ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಈ ಆರೋಪಿಗಳ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ಮಾಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu