ಸುಬ್ರಹ್ಮಣ್ಯ: ಹತ್ತು ದಿನಗಳ ಹಿಂದಷ್ಟೇ ವಿವಾಹಿತನಾದ ಯುವಕ ಸಿಡಿಲು ಬಡಿದು ಮೃತ್ಯು


ಸುಬ್ರಹ್ಮಣ್ಯ: ಸಿಡಿಲು ಬಡಿದು ಹತ್ತು ದಿನಗಳ ಹಿಂದಷ್ಟೇ ವಿವಾಹವಾಗಿರುವ ಯುವಕನೋರ್ವನು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತಪಟ್ಟವರು.

ಸುಬ್ರಹ್ಮಣ್ಯ ಪರಿಸರದಲ್ಲಿ ಶುಕ್ರವಾರ ಸಂಜೆ ವೇಳೆ ಮಳೆ ಆರಂಭವಾಗಿತ್ತು. ಮಳೆಗೂ ಮೊದಲು ಗಾಳಿ, ಗುಡುಗು ಆರಂಭಗೊಂಡಿತ್ತು. ಈ ವೇಳೆ ಮನೆಯ ಅಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದ‌ರ್ ಅವರು ರಾಶಿ ಮಾಡುತ್ತಿದ್ದರು‌. ಈ ವೇಳೆ ಅವರಿಗೆ ಸಿಡಿಲು ಬಡಿದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಅವರು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಮಸುಂದ‌ರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu