ಮಂಗಳೂರು: ರಿಕ್ಷಾದಡಿ ಬಿದ್ದ ತಾಯಿಯನ್ನು ರಿಕ್ಷಾವನ್ನೇ ಎತ್ತಿ ರಕ್ಷಿಸಿದ ಪುತ್ರಿ - ಬಾಲಕಿಯ ಸಮಯಪ್ರಜ್ಞೆಗೆ ಸಿಎಂ ಶ್ಲಾಘನೆ


ಮಂಗಳೂರು: ರಸ್ತೆ ದಾಟುತ್ತಿದ್ದ ಸಂದರ್ಭ ಡಿಕ್ಕಿಯಾದ ರಿಕ್ಷಾದಡಿ ಬಿದ್ದ ತಾಯಿಯನ್ನು ರಿಕ್ಷಾವನ್ನೇ ಮೇಲೆತ್ತಿ ರಕ್ಷಿಸಿದ 7ನೇ ತರಗತಿಯ ವೈಭವಿಯ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ಎಕ್ಸ್’ನಲ್ಲಿ ಘಟನೆಯ ವೀಡಿಯೋ ಸಹಿತ ಪೋಸ್ಟ್‌ ಮಾಡಿರುವ ಸಿಎಂ, ‘ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್‌ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ. ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ.' ಎಂದು ಬರೆದಿದ್ದಾರೆ.


ದ.ಕ.ಜಿಲ್ಲೆಯ ಕಿನ್ನಿಗೋಳಿ ಉಲ್ಲಂಜೆಯ ರಾಮನಗರದಲ್ಲಿ ಸೆ.6ರಂದು ರಸ್ತೆ ದಾಟುತ್ತಿದ್ದ ರಾಜರತ್ನಾಪುರ ನಿವಾಸಿ ಚೇತನಾ(35) ಎಂಬವರಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಿಕ್ಷಾ ನಿಯಂತ್ರಣ ತಪ್ಪಿ ಅವರ ಮೇಲೆಯೇ ಉರುಳಿಬಿದ್ದಿತ್ತು. ತಕ್ಷಣ ಅವರ ನೆರವಿಗೆ ಧಾವಿಸಿದ್ದಾಳೆ. ಆಟೋದಲ್ಲಿದ್ದವರು ಎದ್ದೇಳುತ್ತಿದ್ದಾಗ ರಿಕ್ಷಾವನ್ನು ಎತ್ತಲು ಬಾಲಕಿ ನೆರವಾಗಿದ್ದಲ್ಲದೆ, ಗಾಯಾಳುವಿಗೆ ನೆರವಾಗಿದ್ದರು. ಈ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಸದ್ಯ ಚೇತನಾ ಅವರು ಸುರತ್ಕಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಬೆನ್ನುಮೂಳೆಗೆ ಹಾನಿಯಾಗಿದ್ದು, ಚಿಕಿತ್ಸೆಗೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu