ಪುತ್ತೂರು: ಕೆಎಸ್ಆರ್ಟಿಸಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ತಂದೆ ಸಾವು, ಪುತ್ರ ಗಂಭೀರ
Sunday, May 11, 2025
ಪುತ್ತೂರು: ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ತಂದೆ ಮೃತಪಟ್ಟು ಪುತ್ರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ರವಿವಾರ ನಡೆದಿದೆ.
ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿ ಅರುಣ್ ಕುಲಾಲ್ ಮೃತಪಟ್ಟ ದುರ್ದೈವಿ. ಅವರ ಪುತ್ರ ಧ್ಯಾನ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಎದುರು ಭಾಗದಿಂದ ಆಗಮಿಸುತ್ತಿದ್ದ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ತಂದೆ ಮತ್ತು ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅರುಣ್ ಕುಲಾಲ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಪರಿಣಾಮವಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.