ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ- ಪೈಲಟ್, ಮಗು ಸೇರಿ ಏಳು ಮಂದಿ ಸಾವು


ಡೆಹರಾಡೂನ್: ಅಹಮದಾಬಾದ್ ವಿಮಾನ ದುರಂತದ ನೆನಪು ಮಾಸುವ ಮುನ್ನವೇ ಉತ್ತರಾಖಂಡದ ಕೇದಾರನಾಥ ದೇವಾಲಯದ ಬಳಿ ಹೆಲಿಕಾಪ್ಟರ್ ಒಂದು ಪತನಗೊಂಡು ಪೈಲಟ್, ಒಂದು ಮಗು ಸೇರಿ 7 ಮಂದಿ ಮೃತಪಟ್ಟಿದ್ದಾರೆ.

ರವಿವಾರ ಬೆಳಗ್ಗೆ 5.20ಕ್ಕೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿದ್ದ ಹೆಲಿಕಾಪ್ಟ‌ರ್ ಟೇಕ್‌ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿರುವ ಈ ಹೆಲಿಕಾಪ್ಟರ್ ಗೌರಿಕುಂಡ ಮತ್ತು ತ್ರಿಜುಗಿನಾರಾಯಣ್ ನಡುವಿನ ಅರಣ್ಯದಲ್ಲಿ ಪತನವಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.

ತಾಂತ್ರಿಕ ಸಮಸ್ಯೆಗಳು ಮತ್ತು ಹವಾಮಾನ ವೈಪರಿತ್ಯವೇ ಈ ಹೆಲಿಕಾಪ್ಟರ್ ಪತನಕ್ಕೆ ಕಾರಣ ಎಂದು ಹೇಳಲಾಗಿದೆ.

ಹೆಲಿಕಾಪ್ಟರ್‌ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯದವರು ಎಂದು ತಿಳಿದು ಬಂದಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ತಂಡವನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.

ಇದು ಕಳೆದ 6 ವಾರಗಳಲ್ಲಿ ನಡೆದ 5ನೇ ಘಟನೆ ಎಂದು ಹೇಳಲಾಗಿದೆ. ಮೇ 8ರಂದು ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪೈಲಟ್ ಸೇರಿ 6 ಮಂದಿ ಯಾತ್ರಿಕರು ಮೃತಪಟ್ಟಿದ್ದರು. ಜೂನ್ 7ರಂದು ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ತಾಂತ್ರಿಕ ದೋಷದಿಂದಾಗಿ ರಸ್ತೆಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.